ನವದೆಹಲಿ: ಉರಿ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಉಭಯ ದೇಶಗಳ ನಡುವೆ ಏರ್ಪಟ್ಟಿರುವ ಸಮಸ್ಯೆಗಳ ಬಗೆಹರಿಕೆಗೆ ಸಂಪೂರ್ಣವಾಗಿ ಸಹಾಯ ಮಾಡುವುದಾಗಿ ಚೀನಾ ಬುಧವಾರ ಹೇಳಿದೆ.
ಈ ಕುರಿತಂತೆ ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯದ ಸಲಹೆಗಾರ, ಎರಡು ದೇಶಗಳ ನಡುವೆ ಏರ್ಪಟ್ಟಿರುವ ಶತೃತ್ವ ಕೇವಲ ಆ ಎರಡು ದೇಶಗಳ ಮೇಲೆ ಪರಿಣಾಮ ಬೀರುವುದಿಲ್ಲ. ದಕ್ಷಿಣ ಏಷ್ಯಾ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಏರ್ಪಟ್ಟಿರುವ ಸಮಸ್ಯೆಗಳ ಬಗೆಹರಿಕೆಗೆ ಸಹಾಯ ಮಾಡಲು ಚೀನಾ ಸಿದ್ಧವಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಪ್ರಾಯೋಜಿತ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಲು ಭಾರತ ನಿರ್ಧರಿಸಿತ್ತು. ಭಾರತ ಮತ್ತು ಪಾಕಿಸ್ತಾನ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡುವ ಚಿಂತನೆ ನಡೆಸಿತ್ತು. ಈ ನಿರ್ಧಾರಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿತ್ತಲ್ಲದೇ, ಇದೊಂದು ಅವಿವೇಕಿತನದ ನಿರ್ಧಾರವೆಂದು ಟೀಕೆ ವ್ಯಕ್ತಪಡಿಸಿತ್ತು.
Advertisement