ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನ ವಿವಿಧ ಪ್ರದೇಶಗಳಲ್ಲಿ ಹಾಕಲಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ನಿರ್ಧಾರದ ಪರವಾದ ಬ್ಯಾನರ್ ಗಳನ್ನು ಪಾಕ್ ಪೊಲೀಸರು ತೆರವುಗೊಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಒಳಗೊಂಡ ಅಖಂಡ ಭಾರತದ ನಕ್ಷೆ ಹೊಂದಿದ್ದ ಬ್ಯಾನರ್ ಗಳನ್ನು ಇಸ್ಲಾಮಾಬಾದ್ ನ ಅತ್ಯಂತ್ಯ ಭದ್ರತೆ ಇರುವ ಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಾಕಲಾಗಿತ್ತು.
ಇಂದು ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆ ಬಲೋಚಿಸ್ತಾನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ವಿಚಾರದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಅವರು ಹೇಳಿದ ಸಂದೇಶವನ್ನು ಬ್ಯಾನರ್ ಗಳಲ್ಲಿ ಬರೆಯಲಾಗಿದೆ.
ಭಾರತದ ಪರ ಬ್ಯಾನರ್ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇಸ್ಲಾಮಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಮಂಗಳವಾರ ಬೆಳಗ್ಗೆ ಇಬ್ಬರು ಬೈಕ್ ಸವಾರರು ಈ ಕೃತ್ಯ ಎಸಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಡಾನ್ ವರದಿ ಮಾಡಿದೆ.