ನ್ಯೂಯಾರ್ಕ್: ಜಮ್ಮು- ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಪರೂಪಕ್ಕೆ ಎಂಬಂತೆ ನಡೆಸಿದ ಸಮಾಲೋಚನಾ ಸಭೆ ಫಲಪ್ರದವಾಗಿಲ್ಲ
ಈ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಪ್ರಬಲ 15 ರಾಷ್ಟ್ರಗಳು ಯಾವುದೇ ಹೇಳಿಕೆಯನ್ನು ನೀಡಿಲ್ಲ. ಈ ವಿವಾದವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇತ್ಯರ್ಥಪಡಿಸಿಕೊಳ್ಳುವ ನಿಟ್ಟಿನಲ್ಲಿ ಪಾಕಿಸ್ತಾನ ಹಾಗೂ ಅದರ ಮೈತ್ರಿ ಚೀನಾ ಒತ್ತಡ ಹೇರಿದ್ದವು. ಆದರೆ, ಬಹುತೇಕ ಮಂದಿ ನವದೆಹಲಿ ಹಾಗೂ ಇಸ್ಲಾಮಾಬಾದ್ ಪರಸ್ಪರ ಮಾತುಕತೆಯ ಮೂಲಕ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಸಲಹೆ ನೀಡಿವೆ.
ಚೀನಾದ ಮನವಿ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯ ನಂತರ ವಿಶ್ವಸಂಸ್ಥೆಯಲ್ಲಿನ ಚೀನಾ ರಾಯಬಾರಿ ಜಾಂಗ್ ಜುನ್ ಹಾಗೂ ಪಾಕಿಸ್ತಾನದ ರಾಯಬಾರಿ ಮಲೀಹಾ ಲೋಧಿ ವರದಿಗಾರರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಪ್ರಸ್ತಾಪಿಸಿದ ಕಾಶ್ಮೀರ ವಿವಾದ ಯಾವುದೇ ಪರಿಣಾಮ ಬೀರಿಲ್ಲ. ಪೊಲೆಂಡ್ ಕೂಡಾ ಯಾವುದೇ ಹೇಳಿಕೆ ನೀಡಿಲ್ಲ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರು ಸಮಾಲೋಚನಾ ಸಭೆಯ ನಂತರ ತಿಳಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಸಮಾಲೋಚನಾ ಸಭೆಯ ನಂತರ ಭದ್ರತಾ ಮಂಡಳಿಯ 15 ಮಂದಿ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಚೀನಾ ಪಾಕಿಸ್ತಾನದ ಪರ ಒಲವು ವ್ಯಕ್ತಪಡಿಸಿ ಹೇಳಿಕೆ ನೀಡಿದೆ.
ಚೀನಾ ಮತ್ತು ಪಾಕಿಸ್ತಾನದ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್, ಅಂತಾರಾಷ್ಟ್ರೀಯ ಸಮುದಾಯಕ್ಕೆ ಮರೆ ಮಾಚಿ ವಿಷಯಗಳನ್ನು ಹೇಳಿದ್ದರೆ ನಮ್ಮ ರಾಷ್ಟ್ರದ ಹಿತಾಸಕ್ತಿ ಬಗ್ಗೆ ನಾವು ತಿಳಿಸಬೇಕಾಗಿದೆ ಎಂದು ಹೇಳಿದರು.
ಕಾಶ್ಮೀರ ವಿವಾದವನ್ನು ಭಾರತ ಹಾಗೂ ಪಾಕಿಸ್ತಾನ ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಬಹುತೇಕ ರಾಷ್ಟ್ರಗಳು ಸಲಹೆ ನೀಡಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ 370ನೇ ವಿಧಿಯನ್ನು ಭಾರತ ರದ್ದುಪಡಿಸಿರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಶಿಮ್ಲಾ ಒಪ್ಪಂದಕ್ಕೆ ಬದ್ಧವಾಗಿರುವುದಾಗಿ ಭಾರತ ಪದೇ ಪದೇ ಹೇಳುತ್ತಿದ್ದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪಾಕಿಸ್ತಾನ ಹೇಳುತ್ತಿದ್ದು, ಈ ಸಂಬಂಧ ಚರ್ಚೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Advertisement