ಇಸ್ಲಾಮಾಬಾದ್: ಬೇಹುಗಾರಿಕೆ ಮತ್ತು ಭಯೋತ್ಪಾದನೆಯ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರ ಪರ ವಾದಿಸಲು ವಕೀಲರನ್ನು ನೇಮಕ ಮಾಡಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಗುರುವಾರ ಇಸ್ಲಾಬಾದ್ ಹೈಕೋರ್ಟ್ ನಿರ್ದೇಶನ ನೀಡಿದೆ.
ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿದ ಮರಣದಂಡನೆ ಶಿಕ್ಷೆಯನ್ನು ಪ್ರಶ್ನಿಸಿರುವ ಮರು ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸಲು ಆರೋಪಿ ಪರ ವಕೀಲರ ನೇಮಕ ಪ್ರಕರಣದ ವಿಚಾರಣೆ ನಡೆಸಿದ ಇಸ್ಲಾಮಾಬಾದ್ ಹೈಕೋರ್ಟ್, ವಕೀಲರ ನೇಮಿಸಲು ಭಾರತಕ್ಕೆ ಅವಕಾಶ ನೀಡುವಂತೆ ಪಾಕ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಅಂತರರಾಷ್ಟ್ರೀಯ ನ್ಯಾಯಾಲಯದ(ಐಸಿಜೆ) ಆದೇಶ ಪಾಲಿಸಲು ಪಾಕಿಸ್ತಾನ ಸರ್ಕಾರ ಈಗಾಗಲೇ ಭಾರತಕ್ಕೆ ವಕೀಲರನ್ನು ನೇಮಿಸಲು ಅವಕಾಶ ನೀಡಲಾಗಿದೆ. ಆದರೆ, ಆತನ ಪರ ವಕೀಲರನ್ನು ನೇಮಿಸುವ ಪಾಕಿಸ್ತಾನದ ಪ್ರಸ್ತಾಪಕ್ಕೆ ಭಾರತ ಇನ್ನೂ ಉತ್ತರಿಸಿಲ್ಲ ಎಂದು ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ವಾದ ಆಲಿಸಿದ ಹೈಕೋರ್ಟ್, ಜಾಧವ್ ಪರ ವಕೀಲರ ನೇಮಕ ಸಂಬಂಧ ತಾನು ನೀಡಿರುವ ಆದೇಶವನ್ನು ಭಾರತಕ್ಕೆ ಕಳುಹಿಸುವಂತೆ ಪಾಕ್ ಸರ್ಕಾರಕ್ಕೆ ಆದೇಶಿಸಿಸ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 3 ರವರೆಗೆ ಮುಂದೂಡಿದೆ.
Advertisement