
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದು, ಇದನ್ನು ಪಾಕಿಸ್ತಾನ ಗುರುವಾರ ತಿರಸ್ಕರಿಸಿದೆ.
ಭಾರತದ ಪ್ರತೀಕಾರದ ಕ್ರಮಗಳಿಗೆ ದೇಶದ ಪ್ರತಿಕ್ರಿಯೆಯನ್ನು ರೂಪಿಸಲು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯ ನಂತರ, ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ "240 ಮಿಲಿಯನ್ ಪಾಕಿಸ್ತಾನಿಗಳ ಜೀವನಾಡಿಯನ್ನು" ನಿರ್ಬಂಧಿಸಿದಂತಾಗುತ್ತದೆ ಎಂದು ಹೇಳಿದೆ.
"ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ದೇಶದ ಜನರ ಭದ್ರತೆಗೆ ಯಾವುದೇ ಬೆದರಿಕೆ ಬಂದರೆ ಅದಕ್ಕೆ ಪ್ರತಿಯಾಗಿ ಪ್ರತಿಕಾರ ತೀರಿಸಿಕೊಳ್ಳಲು ಎಲ್ಲಾ ಕ್ಷೇತ್ರಗಳಲ್ಲಿ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಭಾರತವು ತನ್ನ ಸಂಕುಚಿತ ರಾಜಕೀಯ ಕಾರ್ಯಸೂಚಿಯನ್ನು ಮುಂದುವರಿಸಲು ಪಹಲ್ಗಾಮ್ನಂತಹ ಘಟನೆಗಳಿಗೆ ಪಾಕಿಸ್ತಾನವನ್ನು ದೂಷಿಸುವ ಮೂಲಕ ಸಿನಿಕತನ ಪ್ರದರ್ಶಿಸಿದೆ" ಎಂದು ಪಾಕಿಸ್ತಾನ ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
"ಸಿಂಧೂ ಜಲ ಒಪ್ಪಂದದ ಪ್ರಕಾರ ಪಾಕಿಸ್ತಾನಕ್ಕೆ ಸೇರಿದ ನೀರಿನ ಹರಿವನ್ನು ನಿಲ್ಲಿಸುವ ಅಥವಾ ತಿರುಗಿಸುವ ಯಾವುದೇ ಪ್ರಯತ್ನ ಮತ್ತು ಕೆಳ ನದಿಪಾತ್ರದ ಹಕ್ಕುಗಳನ್ನು ಕಸಿದುಕೊಳ್ಳುವುದನ್ನು ಯುದ್ಧಕ್ಕೆ ಸಮವೆಂದು ಪರಿಗಣಿಸಲಾಗುತ್ತದೆ ಮತ್ತು ಇದಕ್ಕೆ ಪೂರ್ಣ ಬಲದ ಪ್ರತಿಕ್ರಿಯೆ ನೀಡಲಾಗುತ್ತದೆ" ಎಂದು ಹೇಳಿದೆ.
ಭಾರತದ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಮತ್ತು ವಾಘಾ ಗಡಿಯನ್ನು ಬಂದ್ ಮಾಡಿದೆ.
Advertisement