
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗುರುವಾರ, ಏಪ್ರಿಲ್ 24 ರಂದು ರಾಷ್ಟ್ರೀಯ ಭದ್ರತಾ ಸಮಿತಿ (ಎನ್ಎಸ್ಸಿ) ಸಭೆ ಕರೆದಿದ್ದು, ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ವಾಯುಪ್ರದೇಶವನ್ನು ಬಂದ್ ಮಾಡಿದೆ ಮತ್ತು ಅಮೃತಸರದ ವಾಘಾ ಗಡಿಯನ್ನು ಮುಚ್ಚಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ, ಪಾಕಿಸ್ತಾನಿಯರಿಗೆ ವೀಸಾ ಸ್ಥಗಿತ ಸೇರಿದಂತೆ ಹಲವು ಕಠಿಣ ನಿರ್ಧಾರ ತೆಗೆದುಕೊಂಡಿದೆ.
ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಇದು 240 ಮಿಲಿಯನ್ ಪಾಕ್ ನಾಗರಿಕರಿಗೆ ಜೀವನಾಡಿಯಾಗಿದೆ ಎಂದು ಪಾಕಿಸ್ತಾನ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
"ಸಿಂಧೂ ಜಲ ಒಪ್ಪಂದದಡಿಯಲ್ಲಿ ಪಾಕಿಸ್ತಾನಕ್ಕೆ ಮೀಸಲಾದ ನೀರನ್ನು ಬೇರೆಡೆಗೆ ತಿರುಗಿಸಲು ಅಥವಾ ನಿಲ್ಲಿಸಲು ನಡೆಸುವ ಯಾವುದೇ ಪ್ರಯತ್ನವನ್ನು ಯುದ್ಧಕ್ಕೆ ಸಮ ಎಂದು ಪರಿಗಣಿಸಲಾಗುತ್ತದೆ" ಎಂದು ಪಾಕ್ ಪ್ರಕಟಣೆಯಲ್ಲಿ ತಿಳಿಸಿದೆ.
Advertisement