

ಮುಜಾಫರಾಬಾದ್: ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆ, ದಬ್ಬಾಳಿಕೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯ ಖಂಡಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK)ದ ರಾವಲಕೋಟ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ 22ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಪ್ರತಿಭಟನಾಕಾರರು ತಮ್ಮ ಮೇಲೆ ನಿಯಂತ್ರಣ ಸಾಧಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಈ ಪ್ರದೇಶವನ್ನು ಇನ್ನು ಮುಂದೆ ಪಾಕಿಸ್ತಾನದ ಭಾಗವೆಂದು ಪರಿಗಣಿಸಬಾರದು ಎಂದು ಆಗ್ರಹಿಸಿದರು ಮತ್ತು ಭಾರತದೊಂದಿಗೆ ಉತ್ತಮ ಸಂಬಂಧ ಬಯಸುವುದರ ಜೊತೆಗೆ, ನೆರವು ಕೋರುವುದಾಗಿ ಎಚ್ಚರಿಕೆ ನೀಡಿದರು.
ಆರ್ಥಿಕ ಸಂಕಷ್ಟ, ಹಣದುಬ್ಬರ, ಬೆಲೆ ಏರಿಕೆ ಮತ್ತು ಪಾಕಿಸ್ತಾನದ ದಬ್ಬಾಳಿಕೆ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯ ಖಂಡಿಸಿ ಜೂನ್ 9 ರಿಂದ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪ್ರತ್ಯೇಕ ಧರಣಿ ನಡೆಯುತ್ತಿದೆ. ಮುಜಾಫರಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದು, ಆಕ್ರೋಶಿತ ಪ್ರತಿಭಟನಾಕಾರರು ಪಾಕ್ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಯಾವುದೇ ಕಾರಣಕ್ಕೂ ಪಾಕಿಸ್ತಾನದ (Pakistan) ಭಾಗವಲ್ಲ ಎಂದು ಘೋಷಿಸಿರುವ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನೆರವಿಗಾಗಿ ಭಾರತದ ಮೊರೆ ಹೋಗುವುದಾಗಿ ನೇರ ಎಚ್ಚರಿಕೆ ನೀಡಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ತಿರಸ್ಕರಿಸಿದ ಪಿಒಕೆ ಜನತೆ, ಸರ್ವಾಧಿಕಾರಿಯನ್ನು ಸಹಿಸುವುದಿಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.
ಗೋಧಿ ಹಿಟ್ಟು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ವಿದ್ಯುತ್ ಬಿಲ್ ಹಾಗೂ ಅಗತ್ಯ ವಸ್ತುಗಳ ಮೇಲೆ ವಿಧಿಸಲಾಗಿರುವ ಭಾರೀ ತೆರಿಗೆಯನ್ನು ಹಿಂಪಡೆಯಬೇಕೆಂದು ಜನ ಆಗ್ರಹಿಸುತ್ತಿದ್ದಾರೆ.
ಈ ಭಾಗದ ಜಲವಿದ್ಯುತ್ ಸಂಪನ್ಮೂಲಗಳನ್ನು ಬಳಸಿಕೊಂಡು ಪಾಕಿಸ್ತಾನದ ಇತರ ಪ್ರಾಂತ್ಯಗಳಿಗೆ ವಿದ್ಯುತ್ ನೀಡಲಾಗುತ್ತಿದೆ. ಆದರೆ ಮೂಲ ನಿವಾಸಿಗಳಾದ ನಮಗೇ ಕತ್ತಲೆಯಲ್ಲಿ ಇಡಲಾಗುತ್ತಿದೆ ಎಂದು ಅಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.