

ಬಿಶ್ಕೆಕ್: ಉಗ್ರರಿಗೆ ಆಶ್ರಯ ನೀಡುವ ದೇಶಗಳ ದ್ವಿಮುಖ ನೀತಿಗೆ ಯಾವುದೇ ಅವಕಾಶ ಇಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಸಮ್ಮುಖದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ಮಂಗಳವಾರ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇಂದು ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್ನಲ್ಲಿ ಶಾಂಘೈ ಸಹಕಾರ ಒಕ್ಕೂಟ(ಎಸ್ಸಿಒ)ದ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಸಂಪೂರ್ಣ ವ್ಯವಸ್ಥೆಯನ್ನು ಮತ್ತು ಅದರ ಹಣಕಾಸು ವ್ಯವಸ್ಥೆಯನ್ನು ಧ್ವಂಸಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಈ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಉಪಸ್ಥಿತಿ ಗಮನ ಸೆಳೆಯಿತು.
ಪ್ರಪಂಚದ ಎಲ್ಲಾ ಯುದ್ಧಗಳು ಮತ್ತು ಸಂಘರ್ಷಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು. ಏಕೆಂದರೆ ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
"ಭಯೋತ್ಪಾದನೆಯ ಬಗ್ಗೆ ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ ಎಂದು ನಾವು ಒಂದೇ ಧ್ವನಿಯಲ್ಲಿ ಮಾತನಾಡಬೇಕು. ನಾವು ಭಯೋತ್ಪಾದನೆಯ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು, ಅದರ ಹಣಕಾಸು, ನೇಮಕಾತಿ, ಮೂಲಭೂತೀಕರಣ ಮತ್ತು ಸುರಕ್ಷಿತ ತಾಣಗಳನ್ನು ಧ್ವಂಸಗೊಳಿಸಬೇಕು" ಎಂದು ಪ್ರಧಾನಿ ಮೋದಿ ಹೇಳಿದರು.
ಶೃಂಗಸಭೆಯ ಮುಖ್ಯ ಹಂತದ ಚರ್ಚೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಸದಸ್ಯ ರಾಷ್ಟ್ರಗಳ ಪ್ರಮುಖ ನಾಯಕರು ಸಮ್ಮಖದಲ್ಲಿ ಪ್ರಧಾನಿ ಮೋದಿ ಭಯೋತ್ಪದನೆ ವಿರುದ್ಧ ಭಾರತದ ನೀಲುವನ್ನು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರ ಎಸ್ಸಿಒ ಶೃಂಗಸಭೆ ಭಾಷಣ ಮಹತ್ವ ಪಡೆದುಕೊಂಡಿದೆ.